ಬದುಕು ಮಾಯೆಯ ಮಾಟ
ಮಾತು ನೊರೆ-ತೆರೆಯಾಟ
ಜೀವ ಮೌನದ ತುಂಬ ಗುಂಬ ಮುನ್ನೀರು
ಕರುಣೋದಯದ ಕೂಡ
ಅರುಣೋದಯವು ಇರಲು
ಎದೆಯ ತುಂಬುತ್ತಲಿದೆ ಹೊಚ್ಚ ಹೊನ್ನೀರು

ನಿಜದಲ್ಲೆ ಒಲವಿರಲಿ
ಚೆಲುವಿನಲೆ ನಲಿವಿರಲಿ
ಒಳಿತಿನಲೆ ಬಲವಿರಲಿ ಜೀವಕೆಳೆಯಾ
ದೇವ ಜೀವನ ಕೇಂದ್ರ
ಒಬ್ಬೊಬ್ಬನು ಇಂದ್ರ
ಏನಿದ್ದರು ಎಲ್ಲ ಎಲ್ಲೆ ತಿಳಿಯಾ.

ಆತನಾಕೆಯೆ ನಮ್ಮ
ಜೀವನೌಕೆಯ ತಮ್ಮ
ಧ್ರುವ ಮರೆಯದಂತೆ ನಡೆಸುತ್ತಲಿರಲಿ
ಈ ನಾನು ಆ ನೀನು
ಒಂದೆ ತಾನಿನ ತಾನು
ತಾಳಲಯ ರಾಗಗಳು ಸಹಜ ಬರಲಿ

 – ಅಂಬಿಕಾತನಯದತ್ತ  

ಬದುಕು ಮಾಯೆಯ ಮಾಟ/Baduku Mayeya Maata